ಈ ಮಣ್ಣು ನಮ್ಮದು ಈ ಗಾಳಿ ನಮ್ಮದು
ಕಲಕಲನೆ ಹರಿಯುತಿಹ ನೀರು ನಮ್ಮದು
ಕಣಕಣದಲು ಭಾರತೀಯ ರಕ್ತ ನಮ್ಮದು
ನಮ್ಮ ಕಾಯ್ವ ಹಿಮಾಲಯವೆ ತಂದೆ ಸಮಾನ
ಗಂಗೆ ತುಂಗೆ ಕಾವೇರಿಯು ತಾಯಿ ಸಮಾನ
ಈ ದೇಶದ ಜನರೆಲ್ಲರೂ ಸೋದರ ಸಮಾನ,
ಈ ನಾಡಿನ ಹೃದಯವದು ದೈವ ಸನ್ನಿಧಾನ
ಅಜಂತ ಎಲ್ಲೋರ ಹಳೆಬೀಡು ಬೇಲೂರ
ಶಿಲೆಗಳಿವು ಕಲೆಯ ಆಗರ
ಹಿಂದು, ಬುದ್ಧ, ಜೈನ, ಕ್ರೈಸ್ತ, ಮುಸಲ್ಮಾನ ಧರ್ಮಗಳ
ಮಹಾಸಾಗರ
ನಡೆದು ಹೋದ ಚರಿತೆಯು
ನಾಳೆ ಎನುವ ಕವಿತೆಯು
ಈ ನಾಡ ಮಣ್ಣಿನಲ್ಲಿದೆ ಜೀವನ ಸಾರ ಜೀವನ ಸಾರ
ತಂಗಾಳಿಗೆ ತಲೆಯ ತೂಗೊ ಪೈರಿನ ಹಾಡು
ಆ ಹಾಡಿಗೆ ತಾಳ ಕೊಡುವ ಯಂತ್ರದ ಜಾಡು
ವಿಜ್ಞಾನವು ಅಜ್ಞಾನವ ಗೆಲ್ಲುವ ಪಾಡು
ಹೊಸ ಭಾರತ ನಿರ್ಮಾಣವು ಸಾಗಿದೆ ನೋಡು